ಬಂಟ್ವಾಳ: ರಾಜ್ಯ ಸರಕಾರ ಗೋಹತ್ಯೆ ನಿಷೇಧ ಪ್ರತಿಬಂಧಕ ನಿಷೇದಾಜ್ಞೆ ಕಾನೂನು ಜಾರಿ ಮಾಡಿದ್ದು, ಆಸ್ತಿ ಮುಟ್ಟುಗೋಲು ಸಹಿತ ಸರಕಾರ ಜಾರಿ ಮಾಡಿದ ಕಾನೂನು ಸರಿಯಾಗಿ ಪಾಲನೆ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬಿಸಿರೋಡಿನ ಶಾಸಕರ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆಯ ಹಿನ್ನೆಯಲ್ಲಿ ಕರೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.

ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು, ಕ್ರಿಮಿನಲ್ ಚಟುವಟಿಕೆಗಳು ನಡೆಯದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ತಾಲೂಕಿನಲ್ಲಿ ಅಕ್ರಮ ಗೋಸಾಗಾಟ, ಗಾಂಜಾ ಸಾಗಾಟ, ಗಾಂಜಾ ಸೇವನೆ, ಹೀಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದು ಖಡಕ್ ಆದೇಶ ನೀಡಿದರು. ಕೇರಳ ಗಡಿ ಭಾಗದಲ್ಲಿ ಪೊಲೀಸರು ಹೆಚ್ಚಿನ ನಿಗಾವಹಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಸೂಚಿಸಿದರು.

ಸಭೆಯಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಥೊರಾಟ್, ವಿಟ್ಲ ಠಾಣಾ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್, ಗ್ರಾಮಾಂತರ ಠಾಣಾ ಎಸ್. ಐ.ಹರೀಶ್, ಪುಂಜಾಲಕಟ್ಟೆ ಎಸ್. ಐ.ಸುತೇಶ್ ಉಪಸ್ಥಿತರಿದ್ದರು.



























