ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮತ್ತೆ ಬಿರುಕು ಕಾಣಿಸಿಕೊಂಡಿದೆ.
ರಾಷ್ಟ್ರೀಯ ಹೆದ್ದಾರಿ 275 ಮಡಿಕೇರಿಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಆದರೆ ದೇವರಕೊಲ್ಲಿ ಕೊಯನಾಡು ಮಧ್ಯೆ ಇರುವ ಅರಣ್ಯ ಇಲಾಖೆಯ ಕಚೇರಿ ಬಳಿ ದೊಡ್ಡ ಪ್ರಮಾಣದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ರಸ್ತೆ ಸಂಪೂರ್ಣ ಕುಸಿದುಹೋಗುವ ಭೀತಿ ಎದುರಾಗಿದೆ.

ಒಂದು ವೇಳೆ ಕುಸಿದು ಹೋದರೆ ಮಡಿಕೇರಿ-ಮಂಗಳೂರು ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆ ಇದೆ. ವಿಷಯ ತಿಳಿದ ತಕ್ಷಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳಕ್ಕೆ ಮಡಿಕೇರಿ ತಹಶಿಲ್ದಾರ್ ಭೇಟಿ ನೀಡಿದ್ದು, ಭಾರೀ ವಾಹನ ಸಂಚಾರ ಬಂದ್ ಮಾಡಲಾಗಿದೆ.




























