ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಯ ಇಡೀ ಪ್ರಕರಣವನ್ನು ಭೇಧಿಸುವಲ್ಲಿ ಶ್ರಮಿಸಿದ ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮ ವಲಯದ ಅಧಿಕಾರಿ/ಸಿಬ್ಬಂದಿಗಳ ತನಿಖಾ ತಂಡಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ದಾಖಲಾದ ಬಳಿಕ ಜಿಲ್ಲೆಯಲ್ಲಿ ಕೋಮುಸೂಕ್ಷ್ಮ ವಾತಾವರಣ ಸೃಷ್ಠಿಯಾಗಿದ್ದು, ಯಾವುದೇ ಸುಳಿವು ಇಲ್ಲದೇ ಇದ್ದ ಈ ಪ್ರಕರಣದಲ್ಲಿ ಆರೋಪಿತರನ್ನು ಶೀಘ್ರ ಪತ್ತೆ ಹಚ್ಚುವುದು ಪೊಲೀಸರಿಗೆ ಸವಾಲಾಗಿತ್ತು.
ಆರೋಪಿತರನ್ನು ಪತ್ತೆ ಹಚ್ಚಲು ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಕಡಬ, ವಿಟ್ಲ, ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಪಶ್ಚಿಮ ವಲಯದ ಅಧಿಕಾರಿ/ಸಿಬ್ಬಂದಿಗಳ ತನಿಖಾ ತಂಡ ರಚಿಸಿ, ರಾಜ್ಯ ಹಾಗೂ ಹೊರ ರಾಜ್ಯದ ವಿವಿಧೆಡೆಗಳಲ್ಲಿ ಪತ್ತೆಗೆ ಪ್ರಯತ್ನಿಸಲಾಗಿತ್ತು. ಒಟ್ಟು 82 ಜನ ಅಧಿಕಾರಿ/ಸಿಬ್ಬಂದಿಗಳ ತನಿಖಾ ತಂಡ, ಹಗಲು ರಾತ್ರಿ ಕರ್ತವ್ಯ ನಿರ್ವಹಿಸಿ, ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ಅಂತಿಮವಾಗಿ ಆರೋಪಿತರನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದು, ಅಲ್ಲದೇ ಈ ಕೋಮು ಸೂಕ್ಷ್ಮ ಪ್ರಕರಣದ ಹಿನ್ನೆಲೆಯಲ್ಲಿ ಪುತ್ತೂರು, ಸುಳ್ಯ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿದ್ದು, ಹತೋಟಿಗೆ ತಂದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಪೊಲೀಸರು ಯಶಸ್ವಿಯಾಗಿದ್ದರು.

ಯಾವುದೇ ರೀತಿಯ ಸುಳಿವು ಇಲ್ಲದೇ ಇದ್ದ, ಈ ಸೂಕ್ಷ್ಮ ಪ್ರಕರಣವನ್ನು ಕೆಲವೇ ದಿನಗಳಲ್ಲಿ ಭೇದಿಸಿ, ಆರೋಪಿತರನ್ನು ಪತ್ತೆ ಹಚ್ಚಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳಿಗೆ ಆ.22 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರಾದ ದೇವಜ್ಯೋತಿ ರೇ ರವರು ವಹಿಸಿದ್ದು, ಅಧಿಕಾರಿ, ಸಿಬ್ಬಂದಿಗಳಿಗೆ ಸೂಕ್ತ ಬಹುಮಾನ ನೀಡಲಾಯಿತು.

ಪೊಲೀಸ್ ಮಹಾ ನಿರೀಕ್ಷಕರು ಸಭೆಯನ್ನುದ್ದೇಶಿಸಿ ಮಾತನಾಡಿ, ಇದು ಯಾವುದೇ ಓರ್ವ ಅಧಿಕಾರಿ/ಸಿಬ್ಬಂದಿಯ ವೈಯಕ್ತಿಕ ಕೆಲಸವಾಗಿರದೇ, ಎಲ್ಲಾ 82 ಜನ ಅಧಿಕಾರಿ ಸಿಬ್ಬಂದಿಗಳ ಸತತ ಪರಿಶ್ರಮದ ಫಲವಾಗಿ ಈ ಸೂಕ್ಷ್ಮ ಪ್ರಕರಣವನ್ನು ಶೀಘ್ರ ಪತ್ತೆ ಹಚ್ಚಲಾಯಿತು ಎಂಬುದಾಗಿ ಪ್ರಶಂಸಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಸನ್ನಿವೇಶದಲ್ಲಿ ಉತ್ತಮ ತಂಡವಾಗಿ ಕರ್ತವ್ಯ ನಿರ್ವಹಿಸಿ, ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಗೌರವ ಕಾಪಾಡಿಕೊಳ್ಳುವಂತೆ ಶುಭ ಹಾರೈಸಿದರು.



























