ಸುಳ್ಯ: ಕೊಡಗಿನ ಗಡಿಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿದೆ.

ಕೊಡಗಿನ ಗಡಿಭಾಗಗಳಲ್ಲಿ ಭಾರೀ ಮಳೆಯಾದ ಕಾರಣ ಕೊಯನಾಡು , ಚೆಂಬು ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದೆ, ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತವಾಗಿದ್ದು, ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಭಾರೀ ಗಾತ್ರದ ಮರಗಳು ಪ್ರವಾಹ ನೀರಿನಲ್ಲಿ ಕೊಚ್ಚಿ ಬಂದು ಕೊಯನಾಡಿನ ಕಿಂಡಿ ಅಣೆಕಟ್ಟಿನಲ್ಲಿ ಅಡ್ಡಲಾಗಿ ನಿಂತಿದೆ. ಹಲವೆಡೆ ಕೃಷಿ, ತೋಟಗಳಿಗೆ ನೀರು ನುಗ್ಗಿದೆ. ಊರುಬೈಲು, ಚೆಂಬು ಭಾಗದಲ್ಲಿ ಸೇತುವೆಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.


























