ಪುತ್ತೂರಿನ ಮುಖ್ಯ ಬಸ್ ನಿಲ್ದಾಣದಲ್ಲಿ ಸಂಜೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಕ್ಷುಲ್ಲಕ ಕಾರಣಕ್ಕೆ ಹೊಡೆದಾಡುವುದು, ಗಲಾಟೆ ಮಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಪುತ್ತೂರು ಎನ್.ಎಸ್.ಯು.ಐ ಕಾರ್ಯಕರ್ತರು ಪುತ್ತೂರು ನಗರ ಪೊಲೀಸ್ ಠಾಣಾಧಿಕಾರಿ ಶ್ರೀಕಾಂತ್ ರಾಥೋಡ್ ರವರಿಗೆ ಮನವಿ ಸಲ್ಲಿಸಿದರು.
ಬಸ್ ನಿಲ್ದಾಣದಲ್ಲಿ ಸಂಜೆ 3:30 ರ ಬಳಿಕ ವಿದ್ಯಾರ್ಥಿಗಳು ಗುಂಪು ಗುಂಪಾಗಿ ಸೇರಿಕೊಂಡು ಮಾತಾಡುವುದು ಸಾಮಾನ್ಯ. ಆದರೇ ಇದೇ ಸಂದರ್ಭಗಳಲ್ಲಿ ಕೆಲವೊಂದು ಕಾಲೇಜಿನ ವಿದ್ಯಾರ್ಥಿಗಳು ಸೇರಿಕೊಂಡು ಸಣ್ಣ ಸಣ್ಣ ವಿಚಾರಗಳಿಗೆ ಹೊಡೆದಾಡುವುದು, ಗಲಾಟೆ ಮಾಡುವುದು, ಕೆಟ್ಟ ಶಬ್ದಗಳಿಂದ ನಿಂದಿಸುವುದು ಗಮನಕ್ಕೆ ಬಂದಿದೆ. ಇದರಿಂದ ಇತರ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವುದು ಮಾತ್ರವಲ್ಲದೇ, ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ.
ಆದ್ದರಿಂದ ಪೊಲೀಸರು ಬಸ್ ನಿಲ್ದಾಣದಲ್ಲಿ ಹೆಚ್ಚಿನ ಗಮನಹರಿಸಬೇಕು, ಅಹಿತಕರ ಘಟನೆಗಳನ್ನು ಸೃಷ್ಟಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸಂಜೆ 3:30 ರಿಂದ 5:30 ವರೆಗೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಠಾಣಾಧಿಕಾರಿಯವರು ಮನವಿ ಸ್ವೀಕರಿಸಿ, “ಬಸ್ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಎನ್ ಎಸ್ ಯು ಐ ಮುಖಂಡ ಭಾತೀಷ್ ಅಳಕೆಮಜಲು, ಎನ್ ಎಸ್ ಯು ಐ ಪುತ್ತೂರು ಅಧ್ಯಕ್ಷ ಚಿರಾಗ್ ರೈ, ಪ್ರಧಾನ ಕಾರ್ಯದರ್ಶಿ ಎಡ್ವರ್ಡ್ ಡಿಸೋಜ, ಉಪಾಧ್ಯಕ್ಷ ಮಹಮ್ಮದ್ ಜವಾದ್, ನಗರ ಎನ್ ಎಸ್ ಯು ಐ ಅಧ್ಯಕ್ಷ ಸುಹೈಲ್, ಪ್ರಧಾನ ಕಾರ್ಯದರ್ಶಿ ಆಸ್ಟನ್ ಫೆರ್ನಾಂಡಿಸ್, ಕಾರ್ಯದರ್ಶಿ ಮಹಮ್ಮದ್ ಹಾರಿಸ್ ಮತ್ತು ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.



























