ಮಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ – ಸಂಸ್ಥೆಗಳಿಗೆ ನೀಡಿರುವ ಸೂಚನೆ ಹಾಗೂ ನಿರ್ದೇಶನ ಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.
ಹೊಸ ವರ್ಷಾಚರಣೆಯ ಸಂತೋಷ ಕೂಟ ನಡೆಸುವ ನಗರದ ಎಲ್ಲ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು (ಒಳಾವರಣದಲ್ಲಿ ಮಾತ್ರ) ಅರ್ಜಿ ಸಲ್ಲಿಸಬೇಕು.
ಡಿ. 31ರ ರಾತ್ರಿ ಆರಂಭವಾಗುವ ಹೊಸ ವರ್ಷಾ ಚರಣೆಯ ಸಂತೋಷ ಕೂಟಗಳನ್ನು ನಡೆಸಲು ಡಿ. 15ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು. ಇಲ್ಲವಾದಲ್ಲಿ ನೂತನ ವರ್ಷಾ ಚರಣೆ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಲ್ಲ ಕಾರ್ಯಕ್ರಮದ ಧ್ವನಿವರ್ಧಕವನ್ನು ರಾತ್ರಿ 10 ಗಂಟೆಯೊಳಗೆ ನಿಲ್ಲಿಸುವುದು.
ರೆಸ್ಟೋರೆಂಟ್ ಮತ್ತು ಮದ್ಯಪಾನ ಸರಬರಾಜು ಮಾಡುವ ಹೊಟೇಲ್ಗಳಲ್ಲಿ ಸರಕಾರವು ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚಿನ ಸಮಯದಲ್ಲಿ ನೂತನ ವರ್ಷಾ ಚರಣೆಯ ಸಂಬಂಧ ಮದ್ಯ ವಿತರಿಸಲು ಉದ್ದೇಶಿಸಿದಲ್ಲಿ ಅಬಕಾರಿ ಇಲಾಖೆಯಿಂದ ಲಿಖೀತವಾಗಿ ಹೆಚ್ಚಿನ ಅವಧಿಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಅಬಕಾರಿ ಇಲಾಖೆಯಿಂದ ಅನುಮತಿ ಪಡೆದಿದ್ದರೂ ಸಹ ಮದ್ಯ ವಿತರಣೆಯನ್ನು ರಾತ್ರಿ 11 ಗಂಟೆಯೊಳಗೆ ಮುಕ್ತಾಯಗೊಳಿಸಬೇಕು.
ಹೊಸ ವರ್ಷಾಚರಣೆಯ ಕಾರ್ಯಕ್ರಮ ಹಾಗೂ ಇನ್ನಿತರ ನೆಪದಲ್ಲಿ ಬಸ್ ತಂಗುದಾಣ, ಸಾರ್ವಜನಿಕ ಉದ್ಯಾನವನಗಳು, ಕ್ರೀಡಾಂಗಣಗಳಲ್ಲಿ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಪಾನ ನಿಷೇಧಿಸಲಾಗಿದೆ.
ವಿದ್ಯಾರ್ಥಿಗಳು, ಯುವಕರು ಡಿ. 31ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು. ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಕೂಟಗಳ ವ್ಯವಸ್ಥಾಪಕರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ಕ್ರಮ ತೆಗೆದು ಕೊಳ್ಳುವುದು. ಸಾರ್ವಜನಿಕ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸದೇ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. 18 ವರ್ಷ ಕೆಳಗಿನವರಿಗೆ ಕಡ್ಡಾಯವಾಗಿ ಮದ್ಯ ವಿತರಿಸ ಕೂಡದು. ಹೆತ್ತವರ ಜತೆಯಲ್ಲಿ ಇರದ ಪಕ್ಷದಲ್ಲಿ 18 ವರ್ಷ ಕೆಳಗಿನವರಿಗೆ ಕಾರ್ಯಕ್ರಮಗಳಿಗೆ ಪ್ರವೇಶವನ್ನು ನಿರ್ಬಂಧಿಸಬೇಕು.
ಸಮುದ್ರ ಕಿನಾರೆಗಳಲ್ಲಿ ಮದ್ಯಪಾನ ಮಾಡುವುದು, ಅಶ್ಲೀಲವಾಗಿ, ಅಸಭ್ಯವಾಗಿ ವರ್ತಿಸುದು, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆ ಕಾರ್ಯಕ್ರಮಗಳನ್ನು ಆಯೋಜಿ ಸುವವರು ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿ ಶಾಮಕ ಉಪಕರಣಗಳು, ತುರ್ತು ಚಿಕಿತ್ಸಾ ವಾಹನ, ಇತರ ಮುಂಜಾಗ್ರತೆ ಕ್ರಮವಹಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಶುಭಕೋರುವ ನೆಪದಲ್ಲಿ ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಕಾರ್ಯಪಡೆಯು ನಗರದ ಅಲ್ಲಲ್ಲಿ ಕಾರ್ಯನಿರತವಾಗಿದ್ದು, ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ರಸ್ತೆಯಲ್ಲಿ ಅನಾವಶ್ಯಕವಾಗಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಶುಭಕೋರುವ ನೆಪದಲ್ಲಿ ಕಿರಿಕಿರಿ ಮಾಡಬಾರದು.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರಗಿಸಲಾಗುವುದು. ವಾಹನಗಳ ವೀಲಿಂಗ್ ಮತ್ತು ಡ್ರಾಗ್ ರೇಸ್, ಬೊಬ್ಬೆ ಹಾಕುವುದು, ಅತೀ ವೇಗವಾಗಿ ವಾಹನಗಳನ್ನು ಚಲಾಯಿಸುವುದು, ಕರ್ಕಶ ಶಬ್ದ ಮಾಡುವುದನ್ನು ತಡೆಗಟ್ಟಲು ಕೂಡ ಸಂಚಾರ ಪೊಲೀಸರು, ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಲಾಗಿದೆ. ಕಾನೂನು ಉಲ್ಲಂಘಿಸುವ ಪ್ರಕರಣಗಳು ಕಂಡು ಬಂದಲ್ಲಿ ಅವರ ವಿರುದ್ಧ ಕಾನೂನು ರೀತಿ ಕ್ರಮ ಜರಗಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ..