ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಈವರೆಗೆ ಇಡೀ ಜಿಲ್ಲೆಯಲ್ಲಿ ಯಾವುದೇ ಸರ್ಕಾರಿ ವೈದ್ಯಕೀಯ ಕಾಲೇಜು ಆಗದೇ ಇರುವುದು ಈವರೆಗೆ ಆಡಳಿತ ನಡೆಸಿದ ಎಲ್ಲಾ ಸರ್ಕಾರಗಳ ವೈಫಲ್ಯ ಹಾಗೂ ಇಲ್ಲಿನ ನಿಷ್ಪ್ರಯೋಜಕ ಜನಪ್ರತಿನಿಧಿಗಳಿಗೆ ಈ ಬಗ್ಗೆ ಸ್ವಲ್ಪವು ಕಾಳಜಿ ಇಲ್ಲದಿರುವುದೇ ಕಾರಣವಾಗಿದೆ ಎಂದು ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಚಂದ್ರಶೇಖರ ಎ. ಹೇಳಿದರು.
ಅವರು ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದರು.

ಭಾರತ ದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ‘ವಿದ್ಯಾಕಾಶಿ’ ಎಂದು ಎಲ್ಲರೂ ಪ್ರಶಂಸಿಸಿರಬೇಕಾದರೆ, ಇಡೀ ಜಿಲ್ಲೆಯಲ್ಲಿ ಒಂದೇ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದೇ ಇರುವುದು ಜಿಲ್ಲೆಗೆ ಕಪ್ಪುಚುಕ್ಕೆಯಾಗಿದೆ. ಇಲ್ಲಿ ಆಡಳಿತ ನಡೆಸಿದ ಯಾವುದೇ ಸರ್ಕಾರಗಳು ಕೂಡಾ ಈ ಬಗ್ಗೆ ಯೋಚನೆ ಮಾಡದೇ ಇರುವುದು ಸರ್ಕಾರಗಳ ವೈಫಲ್ಯವೋ ಅಥವಾ ಜನಪ್ರತಿನಿಧಿಗಳ ವೈಫಲ್ಯವೋ ಅಥವಾ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಪ್ರಭಾವವೋ ಎನ್ನುವ ಪ್ರಶ್ನೆ ಜನಸಾಮಾನ್ಯರಲ್ಲಿ ಕಾಡ ತೊಡಗಿದೆ.
ವಿಪರ್ಯಾಸವೆಂದರೆ, ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕು, ಬನ್ನೂರು ಗ್ರಾಮದ ಸರ್ವೆ ನಂಬ್ರ 84 ರಲ್ಲಿ 40 ಎಕ್ರೆ ಜಮೀನನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಶೈಕ್ಷಣಿಕ ಉದ್ದೇಶಕ್ಕೆ 2015ನೇ ಇಸವಿಯಲ್ಲಿ ಕಾದಿರಿಸಲಾಗಿದೆಯಾದರೂ ಈವರೆಗೂ ಸರ್ಕಾರಿ ವೈದ್ಯಕೀಯ ಶಿಕ್ಷಣ ಆರಂಭಿಸುವ ಯಾವುದೇ ಮುನ್ಸೂಚನೆಗಳು ಕಂಡು ಬರುತ್ತಿಲ್ಲ. ಚುನಾವಣೆ ಹತ್ತಿರ ಬರುವಾಗ ಸಚಿವ ಮಹೋದಯರುಗಳು ಚಿಕ್ಕ ಪುಟ್ಟ ರಸ್ತೆ ಕಾಮಗಾರಿ, ಪ್ರತಿಮೆ ಅನಾವರಣ, ಸರ್ಕಲ್ ಉದ್ಘಾಟನೆ ಇಂತಹ ಕಾಯಕ್ರಮಗಳಲ್ಲಿಯೇ ತಮ್ಮನ್ನು ತೊಡಗಿಸಿಕೊಂಡು, ಸಮಾಜ ಸೇವೆ ಎಂದು ಬಿಂಬಿಸುತ್ತಿದ್ದು, ಜನ ಸಾಮಾನ್ಯರಿಗೆ ಅತ್ಯವಶ್ಯಕವಾಗಿರುವ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳಾದ ಮಡಿಕೇರಿ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳಗೂ ಕೂಡಾ ಅನುಕೂಲವಾಗುವಂತಹ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅತ್ಯವಶ್ಯಕವಾಗಿರುವ ಸರ್ಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಶಂಕು ಸ್ಥಾಪನೆ ಕಾರ್ಯ ಯಾತಕ್ಕಾಗಿ ನೆನೆಗುದಿಗೆ ಬಿದ್ದಿದೆ ಎನ್ನುವುದು ಯಕ್ಷಪ್ರಶ್ನೆಯಾಗಿ ಉಳಿದಿದೆ ಎಂದರು.
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನೇಕ ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿದ್ದು, ಅದರಲ್ಲಿ ಲಕ್ಷ ಗಟ್ಟಲೆ ಹಣ ಪಡೆದುಕೊಂಡು ವೈದ್ಯಕೀಯ ಶಿಕ್ಷಣ ನೀಡುತ್ತಿರುವಾಗ, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಸಿಗಬೇಕಾದರೆ ಸರ್ಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅವಶ್ಯಕತೆ ಈ ಜಿಲ್ಲೆಗೆ ಖಂಡಿತವಾಗಿಯೂ ಅತೀ ಅವಶ್ಯಕವಾಗಿದ್ದು, ಈ ಬಗ್ಗೆ ಯಾರೂ ಜನಪ್ರತಿನಿಧಿಯೂ ಕೂಡಾ ಕಾರ್ಯಪ್ರವೃತ್ತರಾಗದೆ ಮೌನ ವಹಿಸಿರುವುದು ಕಂಡರೆ ಈ ಬೆಳವಣಿಗೆಯಲ್ಲಿ ಯಾವುದೋ ಅಗೋಚರವಾದ ಷಡ್ಯಂತ್ರಗಳಿರುವುದು ಕಂಡು ಬರುತ್ತಿದೆ ಎಂದು ಹೇಳಿದರು.
ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಕಾದಿರಿಸಿದ ಜಮೀನನ್ನು ಬೇರೆ ವಿಚಾರಗಳಿಗೆ ಬಳಸಿಕೊಳ್ಳುವ ವಿಚಾರ ಕೂಡಾ ಗಮನಕ್ಕೆ ಬರುತ್ತಿದ್ದು, ಡಿಸೆಂಬರ್ 30ರೊಳಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲು ಶಂಕು ಸ್ಥಾಪನೆ ಮಾಡಬೇಕಾಗಿ ಕನ್ನಡ ಸೇನೆ ಆಗ್ರಹಿಸುತ್ತದೆ. ಇಲ್ಲವಾದಲ್ಲಿ, ಕನ್ನಡ ಸೇನೆಯ ವತಿಯಿಂದ ಪಕ್ಷಾತೀತವಾಗಿ ಜನಪ್ರತಿನಿಧಿಗಳ ಕಛೇರಿಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು. ಅದೇ ರೀತಿ ಸರಕಾರಿ ವೈದ್ಯಕೀಯ ಶಿಕ್ಷಣ ಸಂಸ್ಥೆಯನ್ನು ಆರಂಭಿಸುವ ಹಾಗೂ ಬೆಂಬಲಿಸುವ ಯಾವುದೇ ಸರ್ಕಾರಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಕನ್ನಡ ಸೇನೆಯು ಪಕ್ಷಾತೀತವಾಗಿ ಬೆಂಬಲಿಸಿ ಅತ್ಯಂತ ತ್ವರಿತ ಗತಿಯಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾಗಿ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗುವಲ್ಲಿ ಸೇನೆಯು ಸಹಕಾರವನ್ನು ನೀಡಲಿದೆ. ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಎಲ್ಲಾ ರೀತಿಯ ಶಿಕ್ಷಣ ಸಂಸ್ಥೆ ಪ್ರಾರಂಭ ಆಗುವವರೆಗೆ ನಿರಂತರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆನ್ನಕೇಶವ , ಜಿಲ್ಲಾ ಕಾರ್ಯಧ್ಯಕ್ಷ ಗುರುಚಂದ್ರ ಹೆಗ್ಡೆ ಉಪಸ್ಥಿತರಿದ್ದರು.


























