ಪುತ್ತೂರು: ಜಿಲ್ಲೆಯ ಪ್ರಭಾವಿ ಹಿಂದೂ ಸಂಘಟನೆಯ ಮುಂದಾಳು ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಸಂಜೆ 6 ಗಂಟೆಗೆ ಕೋಟೆಚಾ ಸಭಾಂಗಣದಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿತನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರಿಗೆ ಅವಕಾಶ ನೀಡುವಂತೆ ಸಂಘ ಪರಿವಾರದ ತಂಡ ತೀವ್ರ ಒತ್ತಡ ಹೇರಿತ್ತು.
ಅಭ್ಯರ್ಥಿಯಾಗಿ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು ಟ್ವಿಟರ್ ಅಭಿಯಾನದ ಮೂಲಕ ನರೇಂದ್ರ ಮೋದಿ, ಅಮಿತ್ ಶಾ ಅವರ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದರು. ಬಿಜೆಪಿಯ ಸರ್ವೇ ಕಾರ್ಯದಲ್ಲಿ ಕೇಳಿ ಬಂದಿದ್ದ ಆಕಾಂಕ್ಷಿತರ ಪಟ್ಟಿಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು, ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೇಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರು.
ಪಕ್ಷೇತರ ಸ್ಪರ್ಧೆಗೆ ಒತ್ತಡ..!!
ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಅರುಣ್ ಪುತ್ತಿಲ ಹೆಸರಿಲ್ಲದ ಹಿನ್ನೆಲೆಯಲ್ಲಿ ಅರುಣ್ ಪುತ್ತಿಲ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗಿದೆ. ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ತುರ್ತು ಸಭೆ ಮಹತ್ವ ಪಡೆದಿದೆ.
























