ಪುತ್ತೂರು: ಸಂಜೀವ ಮಠಂದೂರು ಅವರ ಮನೆಗೆ ಆಗಮಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಹಾಗೂ ಕ್ಯಾ. ಗಣೇಶ್ ಕಾರ್ಣಿಕ್ ರನ್ನು ಕಾರ್ಯಕರ್ತರು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.

ಮಠಂದೂರು ರವರ ಮನೆಗೆ ಆಗಮಿಸುತ್ತಿದ್ದಂತೆ ದಾರಿ ಮಧ್ಯೆಯೇ ತಡೆದ ಕಾರ್ಯಕರ್ತರು, ತಮ್ಮ ಆಕ್ರೋಶ ವ್ಯಕ್ತಪಡಿಸಿದರು ಎನ್ನಲಾಗಿದೆ.
ಸಂಜೀವ ಮಠಂದೂರು ಅವರನ್ನು ಕಡೆಗಣಿಸಲು ಕಾರಣವೇನು ಎಂದು ಪ್ರಶ್ನಿಸಿದ ಕಾರ್ಯಕರ್ತರು, ಹಾಗಾದರೆ ಮಂಡಲ, ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ..!!? ಬೆಲೆ ಇಲ್ಲ ಎಂದಾದರೆ ಆ ಹುದ್ದೆಯಲ್ಲಿ ಇರುವುದಾದರೂ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಜೀವ ಮಠಂದೂರು ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಪ್ರಾಮಾಣಿಕವಾಗಿ ದುಡಿದಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಈಗ ಅವರನ್ನು ಕಡೆಗಣಿಸುವುದು ಎಂದಾದರೆ, ಇದರ ಅರ್ಥವೇನು..!!? ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಬೆಲೆಯೇ ಇಲ್ಲ ಎಂದಾಯಿತು. ನಾವು ಬಿಜೆಪಿ ಪರವಾಗಿ ಕೆಲಸವೇ ಮಾಡುವುದಿಲ್ಲ. ನೀವೇ ಪ್ರಚಾರ ಕಾರ್ಯ ನಡೆಸಿ, ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

ಪುತ್ತೂರು ಬಿಜೆಪಿಯ ಕಾರ್ಯಕರ್ತರೆಂದರೆ ಒಂದು ಕುಟುಂಬದಂತಿದ್ದೇವೆ. ನಾವು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಬಿಜೆಪಿ ವರಿಷ್ಠರು ಪ್ರಾಮಾಣಿಕರನ್ನು ಕಡೆಗಣಿಸುವುದಾದರೆ, ನಾವು ಕೆಲಸ ಮಾಡುವುದಾದರೂ ಯಾಕಾಗಿ. ಇದುವರೆಗೆ ಭೇಟಿ ನೀಡದವರು ಈಗ ಯಾಕಾಗಿ ಭೇಟಿ ನೀಡುವುದು ಎಂದು ಪ್ರಶ್ನಿಸಿದರು ಎನ್ನಲಾಗಿದೆ..

























