ಚಿಕ್ಕೋಡಿ : ಹೀರೆಕುಡಿ ನಂದಿ ಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಟ್ಟ ಹಣ ವಾಪಸ್ ಕೇಳಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಈ ಕುರಿತು ಖಟಕಬಾವಿ ಗ್ರಾಮದಲ್ಲಿ ಹೇಳಿಕೆ ನೀಡಿದ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ನಾಪತ್ತೆಯಾಗಿದ್ದರು ಎಂದು ಭಕ್ತರು ದೂರು ನೀಡಿದ್ದರು.
ಭಕ್ತರ ದೂರಿನ ಮೇರೆಗೆ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರು ಎಂಬ ಬಗ್ಗೆ ವಿಚಾರಣೆ ನಡೆಸಿದ್ದು, ಸ್ವಾಮೀಜಿಗೆ ಪರಿಚಯವಿದ್ದ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದೆವು. ಈ ಸಂದರ್ಭದಲ್ಲಿ ಆತ ಆಶ್ರಮದಲ್ಲಿ ಹತ್ಯೆ ಮಾಡಿ ಖಟಕಬಾವಿ ಗದ್ದೆಯಲ್ಲಿ ತೆರೆದ ಕೊಳವೆ ಬಾವಿಯಲ್ಲಿ ಮೃತದೇಹ ಎಸೆದ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ತಿಳಿಸಿದರು.
ಸ್ವಾಮೀಜಿಯ ಹತ್ಯೆಗೆ ಸಹಕಾರ ನೀಡಿದ ಇಬ್ಬರನ್ನು ಬಂಧಿಸಿದ್ದೇವೆ. ವಿಚಾರಣೆ ಸಂದರ್ಭದಲ್ಲಿ ಹಣ ವಾಪಸ್ ಕೇಳಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಸಾಕ್ಷ್ಯಾಧಾರ ಕಲೆಹಾಕಿ ನ್ಯಾಯಾಲಯಕ್ಕೆ ನೀಡಬೇಕಿರುವ ಹಿನ್ನೆಲೆ ಸದ್ಯಕ್ಕೆ ಕಾರ್ಯಾಚರಣೆ ಸ್ಥಳದಲ್ಲಿ ಯಾರಿಗೂ ಪ್ರವೇಶವಿಲ್ಲ. ಪ್ರಕರಣದ ತನಿಖೆ ಮುಂದುವರಿದಿದೆ. ಬೇರೆ ವ್ಯವಹಾರ ಏನಾದರೂ ಇತ್ತಾ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ವೈಯಕ್ತಿಕ ಕಾರಣಕ್ಕೆ ಹತ್ಯೆ ನಡೆದಿದೆ. ಆರೋಪಿಗಳು ಹೇಳಿದ ಹಲವು ಪ್ರದೇಶಗಳಲ್ಲಿ ಶೋಧ ಮಾಡಿದ್ದೇವೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.
ಹತ್ಯೆಯ ಬಗ್ಗೆ ಆರೋಪಿಗಳು ನೀಡಿರುವ ಮಾಹಿತಿಯ ಮೇರೆಗೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ – ಮುಗಳಖೋಡ ರಸ್ತೆಯ ಪಕ್ಕದ ಗದ್ದೆಯಲ್ಲಿ ಮೃತದೇಹಕ್ಕಾಗಿ ಜೆಸಿಬಿಗಳ ಸಹಾಯದಿಂದ ಶೋಧಕಾರ್ಯ ಮುಂದುವರಿದಿದೆ. ಭಕ್ತರು ದೂರು ನೀಡಿದ ನಾಲ್ಕೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದು, ವಿಚಾರಣೆ ವೇಳೆ ಜೈನಮುನಿ ಹತ್ಯೆ ಪ್ರಕರಣ ಬಯಲಾಗಿದೆ.

























