ಬೆಂಗಳೂರು : ಕರ್ನಾಟಕ ಬಂದ್ ಕರೆ ಬೆನ್ನಲ್ಲೇ ಇಂದು ಮಧ್ಯರಾತ್ರಿಯಿಂದಲೇ ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಇಂದು ಮಧ್ಯರಾತ್ರಿ 12 ಗಂಟೆಯಿಂದ ನಾಳೆ ಮಧ್ಯರಾತ್ರಿ 12 ಗಂಟೆಯವರೆಗೆ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
144 ಸೆಕ್ಷನ್ ಜಾರಿ ವೇಳೆ ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ, ಗುಂಪು ಸೇರುವಂತೆ ಇಲ್ಲ. ಬಂದ್ಗಳನ್ನು ಕರೆಯುವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಬಂದ್ ವೇಳೆ ಆಸ್ತಿ ಪಾಸ್ತಿ ನಾಶ ಮತ್ತು ಸಾವು ನೋವಿಗೆ ಸಂಘಟಕರೇ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಾಹನಗಳನ್ನು ತಡೆಯುವುದು, ಡ್ಯಾಮೇಜ್ ಮಾಡುವುದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವುದು ಮಾಡಿದರೆ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ನಗರದಲ್ಲಿ ವ್ಯಾಪಕ ರಕ್ಷಣಾ ಕ್ರಮ ಜರುಗಿಸಲಾಗುತ್ತದೆ. ಪ್ರತಿಭಟನೆ, ಮೆರವಣಿಗೆಗೆ ಯಾವುದೇ ಅವಕಾಶವಿಲ್ಲ ಎಂದಿದ್ದಾರೆ.
ಬಲವಂತವಾಗಿ ಬಂದ್ ಮಾಡಿದರೆ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ ಆದೇಶ ಉಲ್ಲಂಘನೆಯಾಗುತ್ತದೆ. ಈ ಹಿನ್ನೆಲೆ ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೆ ಬಂದೋಬಸ್ತ್ ಇರುತ್ತದೆ ಎಂದು ತಿಳಿಸಿದ್ದಾರೆ.


























