ಉಡುಪಿ : ಎರಡು ವಾರಗಳ ಹಿಂದೆ ನಗರದ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ನೇಜಾರು ಎಂಬಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಆರೋಪದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಪ್ರವೀಣ್ ಚೌಗುಲೆಯನ್ನು ಇಂದು ನಗರದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಸುದ್ದಿಗೋಷ್ಟಿಯೊಂದನ್ನು ನಡೆಸಿ ಪೊಲೀಸ್ ವಿಚಾರಣೆಯಲ್ಲಿ ಅರೋಪಿಯು ಹತ್ಯೆಗೈದ ಉದ್ದೇಶ ಬಾಯ್ಬಿಟ್ಟಿದನ್ನು ವಿವರಿಸಿದರು.
ಆರೋಪಿ ಮತ್ತು ಹತ್ಯೆಯಾದವರ ಪೈಕಿ ಒಬ್ಬ ಯುವತಿ ಸಹೋದ್ಯೋಗಿಗಳಾಗಿದ್ದ ಕಾರಣ ಅವರ ನಡುವೆ ಸ್ನೇಹ ಬೆಳೆದಿತ್ತು. ಪ್ರವೀಣ್ ಒಂದಷ್ಟು ಸಹಾಯವನ್ನು ಯುವತಿಗೆ ಮಾಡಿದ್ದನಂತೆ. ಆದರೆ, ಸುಮಾರು ಒಂದು ತಿಂಗಳು ಹಿಂದೆ ಯುವತಿ ಪ್ರವೀಣ್ ನನ್ನು ನಿರ್ಲಕ್ಷಿಸಲಾರಂಭಿಸಿದ್ದರಿಂದ ಆಕೆಯ ಬಗ್ಗೆ ಪೊಸ್ಸೆಸ್ಸಿವ್ ಆಗಿದ್ದ ಆರೋಪಿ., ಕೊಲ್ಲುವ ನಿರ್ಧಾರ ಮಾಡಿ ಆಯುಧದೊಂದಿಗೆ ಆಕೆಯ ಮನೆಗೆ ಬಂದಿದ್ದಾನೆ.
ಪ್ರವೀಣ್ ಆರಂಭದಲ್ಲಿ ಅಯ್ನಾಸ್ಗೆ ಮೊದಲ ಅಟ್ಯಾಕ್ ಮಾಡುತ್ತಾನೆ. ಬಳಿಕ ಹಸೀನಾ, ಅಫ್ನಾನ್, ಆಸಿಂಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಳಿಕ ಬೇರೆ ಬೇರೆ ವಾಹನದಲ್ಲಿ ದ.ಕ ಜಿಲ್ಲೆಗೆ ಪರಾರಿಯಾಗಿದ್ದಾನೆ. ಕೈ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ ಇಟ್ಟು., ಹೆಂಡತಿ ತವರು ಮನೆಗೆ ಹೋಗಿದ್ದಾನೆ ಎಂದು ಹೇಳಿದ್ದಾರೆ.
ನಾವು ಎಲ್ಲಾ ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. 2007 ಪೂನಾ ಪೊಲೀಸ್ ಆಗಿದ್ದ, ಉತ್ತಮ ಸಂಬಳಕ್ಕಾಗಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ಸೇರಿದ್ದಾನೆ. ಅಮಲು ಪದಾರ್ಥ ಸೇವನೆ ಮಾಡಿದ್ದನೋ ಎಂಬ ಬಗ್ಗೆ ಮೆಡಿಕಲ್ ರಿಪೋರ್ಟ್ ಬರಲಿದೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಕುಡುಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ವ್ಯಕ್ತಿಯ ವಿಚಾರಣೆ ಮಾಡಿದ್ದೇವೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯುತ್ತೇವೆ ಎಂದು ಎಸ್. ಪಿ ಅರುಣ್ ಹೇಳಿದ್ದಾರೆ.
ಆರೋಪಿ ಪ್ರವೀಣ್ ಕೈಗೆ ಗಾಯವಾಗಿದೆ ಎಂಬ ಬಗ್ಗೆ ಪತ್ನಿಗೆ ಸುಳ್ಳು ಹೇಳಿ ದಾರಿ ತಪ್ಪಿಸಿದ್ದಾನೆ. ಗಂಭೀರ ಪ್ರಕರಣ ಆಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ. ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ ಆಗಿದೆ. ಉಡುಪಿ ನಗರದಲ್ಲಿ ಹೆಚ್ಚುವರಿ ಸಿಸಿಟಿವಿಗಳ ಅಳವಡಿಕೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಗಡಿಪ್ರದೇಶದಲ್ಲಿ ಸಿಸಿಟಿವಿ ಕಣ್ಗಾವಲು ಇರಿಸ್ತೇವೆ ಎಂದಿದ್ದಾರೆ.
ಆರೋಪಿ ಪ್ರವೀಣ್, ಅಯ್ನಾಝ್ ಕುಟುಂಬ ತನಿಖೆಗೆ ಬಹಳ ಸಹಕಾರ ಕೊಟ್ಟಿದ್ದಾರೆ. ನೂರ್ ಮೊಹಮ್ಮದ್ ಕುಟುಂಬ ಬಹಳ ನೋವಲ್ಲಿದ್ದಾರೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತೇವೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಬಗ್ಗೆ ಕುಟುಂಬ ಮನವಿ ನೀಡಿದೆ. ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ. ಹಸೀನಾಗೆ ಆರ್ಥಿಕ ಮೋಸವಾದ ಬಗ್ಗೆ ಮಾಹಿತಿ ಸಿಕ್ಕಿದೆ. ಕುಟುಂಬದಿಂದ ದೂರು ಪಡೆದುಕೊಂಡು ತನಿಖೆ ಮಾಡುತ್ತೇವೆ.
ನಾಲ್ವರ ಕೊಲೆ ಪ್ರಕರಣ ದೊಡ್ಡ ಸವಾಲಾಗಿತ್ತು. ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾದ ಪ್ರಕರಣ ಇದಾಗಿತ್ತು. ನಾವು ತಂಡವಾಗಿ ಕೆಲಸ ಮಾಡಿ ಆರೋಪಿಯನ್ನು ಬಂಧಿಸಿದ್ದೇವೆ. ಚಾರ್ಜ್ ಶೀಟ್ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ.
ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ನೀಡಲು ಮುಂದಾಗಿದ್ದೇವೆ. ಇಲಾಖೆಗೆ 1.50 ಲಕ್ಷ ಬಹುಮಾನ ಕೊಡುವ ಬಗ್ಗೆ ಶಿಫಾರಸ್ಸು ಮಾಡಿದ್ದೇನೆ ಎಂದು ಉಡುಪಿ ಎಸ್.ಪಿ ಡಾ. ಅರುಣ್ ಕೆ ಮಾಹಿತಿ ಹಂಚಿಕೊಂಡಿದ್ದಾರೆ.


























