ಬಂಟ್ವಾಳ : ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ, ವಿಶ್ವಹಿಂದೂ ಪರಿಷದ್, ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಬಿಸಿರೋಡಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿಂದೂ ಕಾರ್ಯಕರ್ತರನ್ನು ಬಂಟ್ವಾಳ ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಬಂಟ್ವಾಳ ಪ್ರಖಂಡದ ಅಧ್ಯಕ್ಷ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿ ಅಶಾಂತಿಯನ್ನು ಸೃಷ್ಟಿ ಮಾಡುತ್ತಿದೆ ಎಂದು ಆರೋಪ ಮಾಡಿದರು.

ಜೊತೆಗೆ ಬಿಜೆಪಿ ಸರಕಾರ ಜಾರಿಗೆ ತಂದ ಗೋತ್ಯೆ ನಿಷೇಧ ಕಾಯ್ದೆಯನ್ನು ಹಿಂದಕ್ಕೆ ಪಡೆದುಕೊಂಡು ನಿರಂತರವಾಗಿ ಗಲಭೆ ನಡೆಯಲು ಕಾರಣವಾಗಿದೆ. ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಅವರಿಗೆ ಅಪಮಾನ ಮಾಡಿದ ಕಾಂಗ್ರೆಸ್ ಬಳಿಕ ಶಾಲಾ ಪಾಠ ಪುಸ್ತಕಗಳಲ್ಲಿ ಇದ್ದ ರಾಷ್ಟ್ರೀಯತೆಯ ವಿಚಾರಗಳನ್ನು ತೆಗೆದುಹಾಕಿದೆ ಎಂದು ಆರೋಪ ಮಾಡಿದರು.

ಶಾಲೆಗಳಲ್ಲಿ ಶ್ರೀ ರಾಮನನ್ನು ಅವಹೇಳನಕಾರಿಯಾಗಿ ಶಿಕ್ಷಕಿ ಮಾತನಾಡಿದ್ದು ಇದಕ್ಕೆ ಸಾಕ್ಷಿಯಾಗಿವೆ ಎಂದು ಅವರು ತಿಳಿಸಿದರು.

ಮಂಗಳೂರಿನಲ್ಲಿ ಇತ್ತೀಚಿಗೆ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಕಾಂಗ್ರೆಸ್ ನಾಯಕರೋರ್ವರು ಬ್ರದರ್ಸ್ ಎಂದು ಹೇಳಿಕೊಂಡ ಪರಿಣಾಮವಾಗಿ ಅವರು ಇಂದು ಮತ್ತೆ ಬೆಂಗಳೂರು ನಗರದಲ್ಲಿ ಬಾಂಬ್ ಬ್ಲಾಸ್ಟ್ ಮಾಡಿದರು. ವಿಧಾನ ಸೌಧದೊಳಗೆ ಪಾಕಿಸ್ತಾನಕ್ಕೆ ಜೈಕಾರ ಹಾಕಿದರು ಎಂದು ಗುಡುಗಿದ ಅವರು ಸರಕಾರದ ಧೋರಣೆ ಸಾರ್ವಜನಿಕರನ್ನು ತಲೆತಗ್ಗಿಸುವಂತೆ ಮಾಡಿದೆ ಎಂದು ಹೇಳಿದರು.

ಅಂತಹ ದೇಶದ್ರೋಹದ ಕೆಲಸ ಮಾಡುವ ಆರೋಪಿಗಳನ್ನು ರಕ್ಷಣೆ ಮಾಡುವ ಕಾಂಗ್ರೆಸ್ ಸರಕಾರ ಬಜೆಟ್ ನಲ್ಲಿ ಕೋಟ್ಯಾಂತರ ರೂ ಹಣವನ್ನು ಅಲ್ಪಸಂಖ್ಯಾತ ಕಲ್ಯಾಣಕ್ಕೆ ಇರಿಸಿದೆ ಎಂದು ಆರೋಪ ಮಾಡಿದರು.
ಇವರ ಹಿಂದೂ ವಿರೋಧಿನೀತಿಯಿಂದ ಪೊಲೀಸರು ದೇಶದ್ರೋಹಿಗಳ ಹಿಂದೆ ಬೀಳದೆ,ದೇಶದ ರಕ್ಷಣೆಗೆ ಪಣತೊಟ್ಟ ಹಿಂದೂಕಾರ್ಯಕರ್ತರ ಮನೆಗೆ ಮಧ್ಯರಾತ್ರಿ ವೇಳೆ ನುಗ್ಗುತ್ತಾರೆ. ಹಿಂದೂ ಕಾರ್ಯಕರ್ತರ ಮೇಲೆ ಗೂಂಡ ಕಾಯ್ದೆಯನ್ನು ಹಾಕಲಾಗುತ್ತದೆ ಇದು ಬೇಸರದ ಸಂಗತಿ ಎಂದರು.

ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರು ಒಗ್ಗಟ್ಟಾಗಿದ್ದಾರೆ ಎಂಬುದನ್ನು ಮತ್ತೆ ನಾವು ತೋರಿಸಿದ್ದೇವೆ. ಅದಕ್ಕೆ ಈ ಪ್ರತಿಭಟನೆ ಸಾಕ್ಷಿಯಾಗಿದೆ ಎಂದರು.

ವಿಶ್ವಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಪ್ರಸನ್ನ ಅವರು ಮಾತನಾಡಿ, ಕಾಂಗ್ರೆಸ್ ಸರಕಾರದ ಒತ್ತಡಕ್ಕೆ ಮಣಿದು ಪೋಲೀಸರು ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ರಾಷ್ಟ್ರೀಯ ವಿಚಾರದಲ್ಲಿ ಸಮಾಜದ ಹಿತದೃಷ್ಟಿಯಿಂದ ಹೋರಾಟ ಮಾಡುವ ಹಿಂದೂ ಕಾರ್ಯಕರ್ತರ ಮೇಲೆ ವಿನಾಕಾರಣ ಗೂಂಡ ಕಾಯ್ದೆ ಹಾಕಿ ಬೆದರಿಸುವ ಕಾರ್ಯ ನಡೆಯುತ್ತಿರುವುದನ್ನು ಸಮಾಜ ಸಹಿಸುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾ ಸಂಚಾಲಕ ಭರತ್ ಕುಮ್ಡೆಲು ಮಾತನಾಡಿ, ಸರಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯಾ, ಸಹಸಂಚಾಲಕರಾದ ಗುರುರಾಜ್ ಬಂಟ್ವಾಳ, ಜಿಲ್ಲಾ ಸಹಕಾರ್ಯದರ್ಶಿ ಶ್ರೀಧರ್ ತೆಂಕಿಲ ಸಂತೋಷ್ ಸರಪಾಡಿ, ಶಿವಪ್ರಸಾದ ತುಂಬೆ, ಬಿಜೆಪಿ ಪ್ರಮುಖರಾದ ಎ.ಗೋವಿಂದ ಪ್ರಭು, ಕಿಶೋರ್ ಕುಮಾರ್ ಬೊಟ್ಯಾಡಿ, ದೇವದಾಸ್ ಶೆಟ್ಟಿ, ರಾಮ್ ದಾಸ ಬಂಟ್ವಾಳ, ಚೆನ್ನಪ್ಪ ಆರ್ ಕೋಟ್ಯಾನ್, ದಿನೇಶ್ ಅಮ್ಟೂರು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.






























