ಪುತ್ತೂರು : ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ಪ್ರಥಮ ಪದವಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಅನ್ವೇಷಣೆ 2024 (ಪ್ರತಿಭಾನ್ವೇಷಣೆ ) ಎಂಬ ಶೀರ್ಷಿಕೆಯಡಿಯಲ್ಲಿ ಹಲವಾರು ಸ್ಪರ್ಧೆಗಳನ್ನು ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲ್ ದೀಪ ಬೆಳಗಿಸಿ ಉದ್ಘಾಟಿಸಿದರು.

ವಿದ್ಯಾರ್ಥಿಗಳ ಅಭಿರುಚಿಗೆ ಅನುಸಾರವಾಗಿ ವೇದಿಕೆಯನ್ನು ನಿರ್ಮಾಣ ಮಾಡಿ ವಿದ್ಯಾರ್ಥಿಯ ಪ್ರತಿಭೆಯನ್ನು ಪರಿಪೋಷಿಸಲಾಗುವುದು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಹಿಂಜರಿಯಬಾರದು ತಮ್ಮ ಸೃಜನಶೀಲತೆಯನ್ನು ಶಿಕ್ಷಣ ದ ಜೊತೆಗೆ ವಿವಿಧ ಸಾಂಸ್ಕೃತಿಕ, ಸಾಮಾಜಿಕ, ಕಲೆ ಮತ್ತು ಕ್ರೀಡೆ ಗಳಲ್ಲಿ ಪ್ರದರ್ಶಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಪ್ರತಿಭಾನ್ವೇಷಣೆಯು ನಿರಂತರ ಪ್ರಕ್ರಿಯೆ . ಅವಕಾಶಗಳ ಗೊಂಚಲು ನಮ್ಮ ಸಂಸ್ಥೆಯಲ್ಲಿ ಸದಾ ವಿದ್ಯಾರ್ಥಿಗಳ ಪರಿಪೂರ್ಣ ಯಶಸ್ವಿಗೆ ತೆರೆದಿರುತ್ತದೆ ಆದರೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತಾಧಿಕಾರಿಯಾದ ಅರ್ಪಿತ್ ಟಿ ಎ. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಗಣಕ ಯಂತ್ರ ವಿಭಾಗದ ಸಹ ಪ್ರಾಧ್ಯಾಪಕಿಯಾದ ನಿಧಿಶ್ರೀ ಸ್ವಾಗತಿಸಿ, ಫ್ಯಾಷನ್ ಡಿಸೈನ್ ವಿಭಾಗದ ಸಹ ಪ್ರಾಧ್ಯಾಪಕಿಯಾದ ಅನನ್ಯ ಭಟ್ ವಂದಿಸಿದರು. ಹಾಸ್ಪಿಟಲ್ ಸಾಯನ್ಸ್ ವಿಭಾಗದ ಸಹ ಪ್ರಾಧ್ಯಾಪಕಿಯಾದ ಶ್ರುತ ನಿರೂಪಿಸಿದರು. ಬಿ.ಸಿ.ಎ ವಿಭಾಗದ ವಿದ್ಯಾರ್ಥಿ ಲಾವನ್ಯ ಪ್ರಾರ್ಥನೆ ಹಾಡಿದರು.



























