ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನ ಸಚ್ಚರಿಪೇಟೆಯ ಖಾಸಗಿ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ ಮಾಡಿರುವುದಕ್ಕೆ ಹಿಂದೂ ಮಕ್ಕಳ ಪೋಷಕರಿಂದ ಆಕ್ಷೇಪ ವ್ಯಕ್ತವಾಗಿದೆ.
ಸಚ್ಚರಿಪೇಟೆಯ ಲಯನ್ಸ್ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಪ್ರವಾದಿ ಜನ್ಮದಿನಾಚರಣೆ ಪ್ರಯುಕ್ತ ಈದ್ ಮಿಲಾದ್ ಆಚರಿಸಲಾಗಿತ್ತು. ಬಿಜೆಪಿ ಮುಖಂಡರೊಬ್ಬರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಕಾರ್ಯಕ್ರಮದ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಹಿಂದೂ ಶಾಲೆಯ ಮಕ್ಕಳ ಪೋಷಕರಿಂದ ಕಾರ್ಯಕ್ರಮದ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಘಟನೆ ಬಗ್ಗೆ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈದ್ ಮಿಲಾದ್ ಆಚರಣೆ ಮಾಡಿದ್ದಲ್ಲದೆ, ಅರಬ್ ರಾಷ್ಟ್ರದ ಉಡುಪು ಧರಿಸಿ ಕುಣಿದಿದ್ದಾರೆ. ಹಿಂದೂ ಮಕ್ಕಳ ಮೇಲೆ ಪ್ರಭಾವ ಬೀರುವಂತೆ ಮಾಡಿದ್ದಾರೆ. ಕೂಡಲೇ ಉಡುಪಿ ಡಿಡಿಪಿಐ ಮಧ್ಯಪ್ರವೇಶಿಸಬೇಕು. ಶಾಲೆಯನ್ನು ಸೀಜ್ ಮಾಡಿ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.