ಮೈಸೂರು : ವಿಶ್ವವಿಖ್ಯಾತ ದಸರಾ ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಈ ನಡುವೆ ಮಹಿಷ ದಸರಾ ಆಚರಣಾ ಸಮಿತಿಯಿಂದ ಮೈಸೂರು ಹೆಸರೇ ಬದಲಾವಣೆ ಮಾಡಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದೆ.
ಮಹಿಷ ದಸರಾ ಆಚರಣಾ ಸಮಿತಿಯಿಂದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಮೈಸೂರು ಬದಲಿಗೆ ಮಹಿಷೂರು ಎಂದು ಮತ್ತು ಚಾಮುಂಡಿಬೆಟ್ಟಕ್ಕೆ ಮಹಿಷ ಬೆಟ್ಟ ಎಂದು ಹೆಸರಿಸಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗಿದೆ.
ಸೆಪ್ಟೆಂಬರ್ 29ರಂದು ಮಹಿಷ ದಸರಾ ಆಚರಣೆಗೆ ನಿರ್ಧಾರ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ಮಹಿಷಾಸುರನಿಗೆ ಪುಷ್ಪಾರ್ಚನೆ ನಡೆಯಲಿದ್ದು, ನಂತರ ಪುರಭವನದ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಮಹಿಷ ದಸರಾ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಚಾಮುಂಡಿ ಬೆಟ್ಟ ಚಲೋ ಮಾಡುವುದಾಗಿ ಪ್ರತಾಪ್ ಸಿಂಹ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮಹಿಷ ದಸರಾ ಹೆಸರಿನಲ್ಲಿ ಈಗಾಗಲೇ ಸಂಘರ್ಷ ಶುರುವಾಗಿದೆ.
ಪ್ರತಿ ವರ್ಷದಂತೆ ಈ ಬಾರಿ ಕೂಡ ಮಹಿಷ ದಸರಾ ವಿವಾದ ತಲೆ ಎತ್ತಿದೆ. ಈ ಬಾರಿಯು ಅದ್ದೂರಿಯಾಗಿ ಮಹಿಷ ದಸರಾವನ್ನು ಆಚರಣೆ ನಡೆಸಲು ದಲಿತ ಸಂಘಟನೆಗಳ ಒಕ್ಕೂಟ ಮುಂದಾಗಿವೆ. ಚಾಮರಾಜನಗರ ಜಿಲ್ಲೆಯಿಂದ ಸುಮಾರು 5 ಸಾವಿರ ಮಂದಿ ಈ ಕಾರ್ಯಕ್ರಮಕ್ಕೆ ತೆರಳಿದ್ದು ವಿಶೇಷ ಬಸ್ಸಿನ ವ್ಯವಸ್ಥೆಯನ್ನ ಮಾಡಲಾಗಿದೆ. ಇದರ ಜೊತೆಗೆ ರಾಜ್ಯಾದ್ಯಂತ ಸುಮಾರು 30 ಸಾವಿರ ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.